ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು…

214
firstsuddi

ನವದೆಹಲಿ : ಐಎನ್‍ಎಕ್ಸ್ ಮೀಡಿಯ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾ.ಬಾನುಮತಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಜಾಮೀನು ನೀಡಿದ್ದು, ಸುಮಾರು 105ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಪಿ.ಚಿದಂಬರಂ ಅವರಿಗೆ ಬಿಡುಗಡೆ ಮೂಲಕ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾಮೀನು ನೀಡುವ ವೇಳೆ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವ್ಯಕ್ತಿಯ ಮೇಲೂ ಪ್ರಭಾವ ಬೀರುವಂತಿಲ್ಲ ಹಾಗೂ ಯಾವುದೇ ಸುದ್ದಿಗೋಷ್ಠಿ ಅಥವಾ ಸಂದರ್ಶನ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಅಲ್ಲದೇ ಚಿದಂಬರಂ ಅವರು ಜಾಮೀನು ಪಡೆಯುವ ವೇಳೆ ಚಿದಂಬರಂ ಅವರು 2ಲಕ್ಷ ರೂ ಬಾಂಡ್ ಹಾಗೂ ಶ್ಯೂರಿಟಿ ನೀಡಬೇಕು. ನ್ಯಾಯಾಲಯದ ಅನುಮತಿಯಿಲ್ಲದೆ ಚಿದಂಬರಂ ಅವರು ವಿದೇಶ ಪ್ರಯಾಣ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.