ಬೆಂಗಳೂರು : ಕೊರೊನಾ ಸಂಕಷ್ಟದ ಸಮಯದಲ್ಲಿ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಮತ್ತು ಅನುದಾನ ರಹಿತ ಶಿಕ್ಷಕರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ.
ಈ ಕುರಿತು ನಗರದ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಹೆಚ್.ಡಿ. ದೇವೇಗೌಡ ಅವರು, ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾನು ಈಗಾಗಲೇ ಪತ್ರ ಬರೆದಿದ್ದೇನೆ. ಇನ್ನೂ ಮತ್ತೊಂದು ಪತ್ರವನ್ನು ಬರೆಯುತ್ತೇನೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರ ಮಾನವೀಯತೆ ತೋರಿಸಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ವಿಚಾರವನ್ನು ನಾನು ಸಂಸತ್ ಅಧಿವೇಶನದಲ್ಲೂ ಚರ್ಚಿಸುತ್ತೇನೆ ಎಂದರು.










