ಬೆಂಗಳೂರು : ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಸೂಚನೆ ನೀಡಿದೆ.
ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ?
• ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವುದು.
• ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಬೇಕು.
• ಕಾರ್ಯಕ್ರಮದ ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುವುದು.
• ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ನ್ಯಾಯಾಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯಬೇಕು.
• ಉತ್ಸವಕ್ಕೆ ಮುಂಚಿತವಾಗಿ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸಬೇಕು.
• ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳಬೇಕು. ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸಬೇಕು.
• ವಿಶೇಷವಾಗಿ ಹೈ-ಟೆನ್ಶನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸಬೇಕು.










