ಚಿಕ್ಕಮಗಳೂರು : ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು…

216
firstsuddi

ಚಿಕ್ಕಮಗಳೂರು : ನಗರ ಹೊರವಲಯದ ಹಿರೇಮಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ನೂರಾರು ಭಕ್ತರ ನಡುವೆ ಶುಕ್ರವಾರ ವೈಭವದಿಂದ ನಡೆಯಿತು.
ಜಯಂತಿ ಪ್ರಯುಕ್ತ ರಾಮನಾಮ ಲಿಪಿಯನ್ನು ಬರೆಯುತ್ತಿರುವ ಅಪರೂಪದ ಹನುಮನ ವಿಗ್ರಹಕ್ಕೆ ಬೆಳಿಗ್ಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ಅರ್ಚನೆ ಜರುಗಿತು.
ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಮತ್ತು ವೈಷ್ಣವಸಿಂಹ ಅವರಿಂದ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಇದೇ ವೇಳೆ ಭಕ್ತರಿಂದ ಸಾಮೂಹಿಕ ಭಜನೆ, ನಾಮ ಸಂಕೀರ್ತನೆ, ಸ್ತ್ರೋತ್ರ ಪಠಣ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಿತು.
ಜಯಂತಿ ಪ್ರಯುಕ್ತ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಬೆಳಗಿನಿಂದ ರಾತ್ರಿಯವರೆಗೆ ದೇವಾಲಯಕ್ಕೆ ತೆರಳಿ ಪೂಜೆ, ಪ್ರಾರ್ಥನೆ ಸಲ್ಲಿಸಿದರು.