ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇಂದು ಕಾಂಗ್ರೆಸ್ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಬಂದ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ಮಾರ್ಗ ಮಧ್ಯೆಯೇ ತಡೆದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ರೆಬಲ್ ಆಗಿದ್ದು, ಬನ್ರೋ, ಬನ್ನಿ ಎಂದು ರಸ್ತೆ ಮಧ್ಯೆಯೇ ನಿಂತಿದ್ದರು. ಇಬ್ಬರನ್ನೂ ನಿಯಂತ್ರಿಸೋದಕ್ಕೆ ಪೊಲೀಸರು ಹರಸಾಹಸಪಟ್ಟರು.
ಈ ಮಧ್ಯೆ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು ಮತ್ತೊಂದು ಮಾರ್ಗದಲ್ಲಿ ಕೇಸರಿ ಶಲ್ಯ ಹಾಕಿಕೊಂಡು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಮಾಜಿ ನಗರಸಭೆ ಸದಸ್ಯ ಪುಷ್ಪರಾಜ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಕಾಂಗ್ರೆಸ್ ಕಾರ್ಯಕರ್ತನ್ನ ಬಂಧಿಸಿದ ಬಳಿಕ ಪರಿಸ್ಥಿತಿ ಶಾಂತಗೊಂಡಿದೆ.










