ನವದೆಹಲಿ: ಕೆನರಾ ಬ್ಯಾಂಕ್ಗೆ ವಂಚಿಸಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ (78) ಅವರನ್ನು ಬಂಧಿಸಿದೆ.
ಮುಂಬೈನ ಇಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಗೋಯಲ್ ಅವರನ್ನು ಇಡಿ ಬಂಧಿಸಿದೆ.
ಕೆನರಾ ಬ್ಯಾಂಕ್ಗೆ 538 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ವೇಸ್ ಸಂಸ್ಥಾಪಕ ಗೋಯಲ್ ಮತ್ತು ಅವರ ಪತ್ನಿ ಅನಿತಾ ಸೇರಿದಂತೆ ಕಂಪನಿಯ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್ಐಆರ್ ದಾಖಲಿಸಿದೆ. ಇದರ ಆಧಾರದ ಮೇಲೆ ಇಡಿ ವಿಚಾರಣೆ ನಡೆಸುತ್ತಿದೆ.
ಗೋಯಲ್ ಅವರು 538 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಅವರನ್ನು ಮುಂಬೈನ ಪಿಎಂಎಲ್ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಬಳಿಕ ಇಡಿ ಹೆಚ್ಚಿನ ವಿಚಾರಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಜೆಟ್ ಏರ್ವೇಸ್ ಲಿಮಿಟೆಡ್ಗೆ (ಜೆಐಎಲ್) 848.86 ಕೋಟಿ ಮೊತ್ತದ ಸಾಲವನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ 538.62 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್ನ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.










