ನವದೆಹಲಿ : ಜುಲೈ 31 ರೊಳಗೆ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಇಂದು ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ.ಎಂ.ಆರ್.ಶಾ ಅವರಿದ್ದ ದ್ವಿಸದಸ್ಯ ಪೀಠ, ಜುಲೈ 31 ರೊಳಗೆ ಅಸಂಘಟಿತ ವಲಯದ ಕಾರ್ಮಿಕರು ಯೋಜನೆಗಳ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಪೋರ್ಟಲ್ ಅಭಿವೃದ್ಧಿಪಡಿಸಬೇಕೆಂದು ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ಅಲ್ಲದೇ ವಲಸೆ ಕಾರ್ಮಿಕರಿಗಾಗಿ ಈಗಾಗಲೇ ನಡೆಯುತ್ತಿರುವ ಕಮ್ಯೂನಿಟಿ ಕಿಚನ್ ಗಳನ್ನು ಕೊರೊನಾ ಕಡಿಮೆಯಾಗುವವರೆಗೆ ಮುಂದುವರಿಸುವಂತೆ ಕೋರ್ಟ್ ಸೂಚಿಸಿದೆ.
ಇನ್ನೂ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿ ಇರುವವರೆಗೂ ವಲಸೆ ಕಾರ್ಮಿಕರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡುವಂತೆ ನ್ಯಾಯಪೀಠ ಕೇಂದ್ರಕ್ಕೆ ಸೂಚಿಸಿದೆ.










