ಶ್ರೀನಗರ : ನಿನ್ನೆ ನಡೆದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿತು. ಇದರಿಂದ ಆಕ್ರೋಶಗೊಂಡ ಗುಂಪೊಂದು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪಂಜಾಬ್ ನ ಸಂಗ್ರೂರ್ ಜಿಲ್ಲೆಯ ಭಾಯ್ ಗುರ್ದಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಮೊಹಲಿ ಜಿಲ್ಲೆಯ ಖಾರರ್ ನ ರಾಯತ್ ಬಹರ ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ.
ನಿನ್ನೆ ರಾತ್ರಿ ನಡೆದ ಭಾರತ- ಪಾಕಿಸ್ತಾನದ ಮ್ಯಾಚ್ ಬಳಿಕ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ವಿದ್ಯಾರ್ಥಿಗಳು ತಮ್ಮ ಕೋಣೆಗಳಿಗೆ ನುಗ್ಗಿ ರಾಡ್ ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕಾಶ್ಮೀರಿ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.
ಘಟನೆಯಲ್ಲಿ ರಾಯತ್ ಬಹರ ವಿವಿಯ ನಾಲ್ವರು ಸೇರಿದಂತೆ 10 ಕಾಶ್ಮೀರಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಹಾಸ್ಟೆಲ್ ನಲ್ಲಿ ಹಲ್ಲೆ ನಡೆದ ವೇಳೆ ಮುರಿದ ಕುರ್ಚಿಗಳು, ಬೆಡ್ ಗಳು ಹಾಗೂ ಗಾಯಗೊಂಡ ವಿದ್ಯಾರ್ಥಿಗಳಿರುವ ದೃಶ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಲಾಗಿದೆ. ಆ ವಿಡಿಯೋವನ್ನು ಆಧಾರವಾಗಿಟ್ಟುಕೊಂಡು ದಾಳಿ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.










