ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದೀಗ ತಮ್ಮ ಮಾತಿನ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ನಾನು ಆ ರೀತಿ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮಾದರಿಯಲ್ಲಿ ಎಲ್ಲರೂ ಆಯ್ಕೆಯಾಗಲಿದ್ದಾರೆ. ನನ್ನ ಹೇಳಿಕೆಯನ್ನೇ ಬದಲಿಸಲಾಗಿದೆ. ಡಿಕೆಶಿ ಮತ್ತು ನಾನು ಇಬ್ಬರೂ ಸಿಎಂ ಅಭ್ಯರ್ಥಿಗಳು ಹೌದು ಎಂದಿದ್ದೆ. ಉಳಿದೆಲ್ಲವೂ ಸುಳ್ಳು ಸುದ್ದಿ ಎಂದು ಹೇಳಿದರು.
ನಿನ್ನೆ ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಸಿಎಂ ಸ್ಥಾನದ ಆಕಾಂಕ್ಷಿ. ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಪ್ರಜಾಪ್ರಭುತ್ವದಲ್ಲಿ ಇದು ಸಾಮಾನ್ಯ. ಇದರಲ್ಲಿ ಏನೂ ತಪ್ಪಿಲ್ಲ. ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಬಯಸೋದರಲ್ಲಿ ಯಾವುದೇ ತಪ್ಪಿಲ್ಲ. ನಾನು ಸಿಎಂ ಆಗಬೇಕು ಎಂದು ಬಯಸೋದ್ರಲ್ಲಿ ಯಾವುದೇ ತಪ್ಪಿಲ್ಲ. ಹೈಕಮಾಂಡ್ ಮುಂದಿನ ನಿರ್ಧಾರ ಮಾಡುತ್ತೆ ಎಂದಿದ್ದರು.










