ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.
ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರು ರಾಯಚೂರು ಮೂಲದ ಕಾರ್ಮಿಕರು ಎನ್ನಲಾಗುತ್ತಿದೆ. ರಾಯಚೂರು ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಬಡ ಕೂಲಿ ಕಾರ್ಮಿಕರನ್ನು ಹೊತ್ತ ಕ್ರೂಸರ್ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ಶಿರಾ ಬಳಿ ಬರುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಕ್ರೂಸರ್ ಲಾರಿಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. 11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










