ಧರ್ಮ–ಧರ್ಮಗಳ ನಡುವೆ ಜಗಳ ಹಚ್ಚುವ ಕೆಲಸಕ್ಕೆ ಕೇಂದ್ರ ಮುಂದಾಗಿದೆ – ಸಸಿಕಾಂತ್ ಸೆಂಥಿಲ್.

239
firstsuddi

ರಾಯಚೂರು: ‘ದೇಶದಲ್ಲಿ ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸಹೋದರರಂತೆ ಇದ್ದವರನ್ನು ಕಲಹಕ್ಕೆ ಪ್ರಚೋದಿಸುತ್ತಿದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿದ್ದ ಸ್ಥಿತಿ ಮತ್ತೆ ಹತ್ತಿರ ಬರುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಅಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮ–ಧರ್ಮಗಳ ನಡುವೆ ಜಗಳ ಹಚ್ಚುವ ಕೆಲಸಕ್ಕೆ ಕೇಂದ್ರ ಮುಂದಾಗಿದೆ. ಸಂವಿಧಾನದ ನೀತಿ ನಿಯಮಗಳನ್ನು ಹಾಳು ಮಾಡಿದೆ. ದೇಶವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿನ್ನೆಡೆ ಅನುಭವಿಸುವಂತೆ ಮಾಡಿದೆ’ ಎಂದು ದೂರಿದರು.

ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಪೂರಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಣ ಸುಧಾರಣೆಗೆ ಮೊದಲು ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ, ಶಿಕ್ಷಣ, ಆರೋಗ್ಯದ ಕಡೆ ಗಮನ ಹರಿಸಿ, ಅದಕ್ಕೆ ಹೆಚ್ಚಿನ ಬಜೆಟ್ ಮೀಸಲಿಡುವಂತೆ ತಿಳಿಸಿದರು. ದೆಹಲಿಯ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ ಅದನ್ನು ಆಡಳಿತದಲ್ಲಿರುವ ಸರ್ಕಾರ ಕಿತ್ತುಕೊಂಡಿದೆ. ಒತ್ತಾಯ ಪೂರ್ವಕ ತಮ್ಮದೇ ಆದ ಸೈದ್ಧಾಂತಿಕ ನಿಲುವುಗಳನ್ನು ಜಾರಿಗೊಳಿಸುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವಿಧಿಸಿ ದೇಶದಲ್ಲಿ ಕೈಗಾರಿಕ ಕಂಪನಿಗಳು ನಷ್ಟ ಅನುಭವಿಸುವಂತೆ ಮಾಡಿದೆ. ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಖಾಸಗಿಕರಣ ಮಾಡಲು ಹೋರಟಿದ್ದಾರೆ ಇದು ಸರಿಯಾದ ನಿರ್ಧಾರ ಅಲ್ಲ ಎಂದರು. ದೇಶವು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ; ಅದಕ್ಕೆ, ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಅಧಿಕಾರದಿಂದ ಹೊರಬಂದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಟೀಕಿಸುತ್ತಿದ್ದೇನೆ. ಪ್ರಜೆಗಳಿಗೆ ಜಾಗೃತಿಗೊಳಿಸಿ ಅವರ ಉಳಿವಿಗೆ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಸಂಚಾಲಕ ಸೈಯದ್ ಹಫಿಜುಲ್ಲಾ ಮಾತನಾಡಿ, ಜಿಲ್ಲೆಯಲ್ಲಿ ಎರಡು ಸಾವಿರ ಶಿಕ್ಷಕರ ಕೊರತೆ ಇದೆ. ಹೀಗಿದ್ದಾಗ ಎಸ್ಸೆಸ್ಸೆಲ್ಸಿ ಫಲಿತಾಂಶ ಹೇಗೆ ಸುಧಾರಣೆಯಾಗುತ್ತದೆ. ಈಗ ಸದ್ಯ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಒಬ್ಬರು ಅಥವಾ ಇಬ್ಬರು ಶಿಕ್ಷಕರು ಬೋಧಿಸುತ್ತಿದ್ದಾರೆ. ಹೊಸ ಶಿಕ್ಷಣ ನೀತಿಗಳು ಜಾರಿಗೆ ತರುವುದಕ್ಕಿಂತ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಶಿಕ್ಷಕರ ನೇಮಕ ಅಗತ್ಯತೆ ಇದೆ. ಅವುಗಳ ಬಗ್ಗೆ ಸರ್ಕಾರ ಗಮನಹರಿಸಲಿ ಎಂದರು.

5ನೇ ಮತ್ತು 7ನೇ ತರಗತಿ ಬೋರ್ಡ್ ಪರೀಕ್ಷೆ ಮಾಡುವುದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಮೊದಲೇ ಶಿಕ್ಷಕರ ಕೊರತೆ ಎದುರಿಸುತ್ತಿರುವ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆ ಅಗತ್ಯತೆ ಇಲ್ಲ. ಇದರಿಂದ ಅನುತ್ತೀರ್ಣಗೊಂಡ ಮಕ್ಕಳು ಶಾಲೆ ಬಿಡುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.