ಮಂಡ್ಯ : ನಾಮಪತ್ರ ಸಲ್ಲಿಸಲು ಬರುತ್ತಿದ್ದ ವೇಳೆ ನನಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಮಾಧುಸ್ವಾಮಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನೆಲ್ಲಾ ದೇವರಾಜು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಹೇಳಿದ್ದಾರೆ. ಚುನಾವಣಾ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾದ್ದರಿಂದ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ನಾಮಪತ್ರ ಸಲ್ಲಿಸಲು ತಾಲ್ಲೂಕು ಕಚೇರಿಯತ್ತ ತೆರಳುತ್ತಿದ್ದರು. ಈ ವೇಳೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್. ದೇವರಾಜು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್ ಅವರು ಕೂಡಾ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು. ಈ ವೇಳೆ ನಾರಾಯಣ ಗೌಡ ಅವರ ಮೇಲೆ ಕೆಲವು ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತಾನಾಡಿದ ನಾರಾಯಣ ಗೌಡ ಅವರು, ನನಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲದೇ ಸಚಿವ ಮಾಧುಸ್ವಾಮಿ ಅವರ ಮೇಲೂ ಹಲ್ಲೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೇವರಾಜು ಅವರು ಇದರ ಪರಿಣಾಮ ಅನುಭವಿಸಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.










