ಚಿಕ್ಕಮಗಳೂರು : ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡೀಕರ್ ಅವರ ನಿಸ್ವಾರ್ಥ ಸೇವೆ ಮತ್ತು ಆದರ್ಶಗಳನ್ನು ಇಂದಿನ ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ತಾಲ್ಲೂಕು ಕ್ರೀಡಾಧಿಕಾರಿ ಇ.ಆರ್.ಸೋಮಶೇಖರ್ ಸಲಹೆ ಮಾಡಿದರು.
ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕ ನಗರದ ಆಜಾದ್ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸೇವಾದಳದ ಸಂಸ್ಥಾಪಕ ನಾ.ಸು. ಹರ್ಡೀಕರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸೇವೆ ಇಂದು ಪ್ರಚಾರದ ಸರಕಾಗಿದೆ. ಪ್ರಚಾರಕ್ಕಾಗಿ ಮಾತ್ರ ಸೇವೆ ಮಾಡುವುದು ಎಲ್ಲೆಡೆ ಕಂಡುಬರುತ್ತಿದೆ ಎಂದು ವಿಷಾಧಿಸಿದ ಅವರು ಈ ಪ್ರವೃತಿ ನಿಲ್ಲಬೇಕು. ನಾ.ಸು.ಹರ್ಡೀಕರ್ ಅವರಂತೆ ಎಲ್ಲರೂ ನಿಸ್ವಾರ್ಥ ಸೇವೆಗೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಅಮೇರಿಕಾದಲ್ಲಿ ಉನ್ನತ ವ್ಯಾಸಂಗ ಮಾಡಿದ ಹರ್ಡೀಕರ್ ಅವರು ಅಲ್ಲೇ ಐಶಾರಾಮಿಯಾಗಿ ಬದುಕಬಹುದಿತ್ತು. ಆದರೆ ಸ್ವದೇಶಕ್ಕೆ ಮರಳಿ ತಾಯ್ನಾಡಿನ ಮುಕ್ತಿಗಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಮದುವೆಯಾಗದೇ ಬ್ರಹ್ಮಚಾರಿಯಾಗೇ ಉಳಿದು ತಮ್ಮ ಸರ್ವಸ್ವವನ್ನೂ ರಾಷ್ಟ್ರಕ್ಕಾಗಿ ಸಮರ್ಪಿಸಿದರು. ಭಾರತ ಸೇವಾದಳವನ್ನು ಸ್ಥಾಪಿಸುವ ಮೂಲಕ ದೇಶಭಕ್ತರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಸೃಷ್ಟಿಸಿದರು ಎಂದು ಹೇಳಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಮಹೇಶಪ್ಪ ಮಾತನಾಡಿ ಇಂದಿನ ಯುವಪೀಳಿಗೆ ನಾ.ಸು.ಹರ್ಡೀಕರ್ ಅವರಂತೆ ಶಿಸ್ತು, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಇ. ಲೋಕೇಶ್ವರಾಚಾರ್ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷ ಶಾಲೆಯಲ್ಲಿ ಹರ್ಡೀಕರ್ ಅವರ ಜನ್ಮದಿನಾಚರಣೆ ಮತ್ತು ಪುಣ್ಯಸ್ಮರಣೆ ಕಾರ್ಯಕ್ರಮ ವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಾ.ಸು.ಹರ್ಡೀಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಪುಷ್ಪನಮನ ಸಲ್ಲಿಸಲಾಯಿತು. ತಾಲ್ಲೂಕು ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪ, ಶಿಕ್ಷಕರಾದ ಶಶಿಕಲಾ, ವೇದಾವತಿ, ಮೀನಾಕ್ಷಿ ಉಪಸ್ಥಿತರಿದ್ದರು.










