ಪದ್ಮರಾಜ ದಂಡಾವತಿ, ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

57
firstsuddi

ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪೈಕಿ ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಎಂಬ ಕೃತಿಗೆ ಈ ವರ್ಷದ ಪುಸ್ತಕ ಪ್ರಶಸ್ತಿ ಲಭಿಸಿದೆ.

ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು. ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ.ಸಿ ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು. ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.