ಚಾಮರಾಜನಗರ : ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ರವಿ (35) ನೇಣಿಗೆ ಶರಣಾದ ವ್ಯಕ್ತಿ. ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ ನೀಡಿದ ಹಿನ್ನಲೆ ಮನನೊಂದ ರವಿ ರಾತ್ರಿ ವೇಳೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನೂ ಅಭಿಮಾನಿ ಸಾವಿಗೆ ಸಂತಾಪ ಸೂಚಿಸಿರುವ ಬಿ.ಎಸ್.ಯಡಿಯೂರಪ್ಪ ಅವರು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ.










