ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ – ಮಾಜಿ ಸಚಿವ ವಿನಯಕುಮಾರ್‌ ಸೊರಕೆ. 

208
firstsuddi

ಉಡುಪಿ: ‘ಕಾಂಗ್ರೆಸ್‌ನ ಅಭಿವೃದ್ಧಿ, ಜನಪರ ಕೆಲಸಗಳನ್ನು ಸಹಿಸಿಕೊಳ್ಳದ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಅಪಪ್ರಚಾರ ಮಾಡಿ, ಅಧಿಕಾರ ಹಿಡಿದಿದೆ. ಆದರೆ ಇದು ಶಾಶ್ವತ ಅಲ್ಲ. ಬಿಜೆಪಿಯವರ ಮೋಸ, ವಂಚನೆಯ ಅರಿವಾದಾಗ ಸ್ವತಃ ಜನರೇ ಅವರನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ’ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಸಮಿತಿಯ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್‌ ಕಾರ್ಯಕರ್ತರು ಧೃತಿಗೆಡಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್‌ಗೆ ಸೋಲು ಹೊಸತಲ್ಲ, ಸೋತಾಗ ಮತ್ತೆ ಫಿನಿಕ್ಸ್‌ನಂತೆ ಎದ್ದು ಬಂದ ಸಾಕಷ್ಟು ಉದಾಹರಣೆಗಳಿವೆ. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ತಳಮಟ್ಟದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು’ ಎಂದರು.

‘ರಾಜ್ಯ ರಾಜಕಾರಣದ ವಿದ್ಯಮಾನ ಗಮನಿಸಿದರೆ ವಿಧಾನಸಭಾ ಚುನಾವಣೆ ಈ ವಷಾಂತ್ಯದಲ್ಲಿಯೇ ಬರುವ ಸಾಧ್ಯತೆಗಳಿವೆ. ಅದರ ಜತೆಗೆ ಪಂಚಾಯಿತಿ ಚುನಾವಣೆಯೂ ನಮ್ಮ ಮುಂದಿದೆ. ಈ ಬಗ್ಗೆ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕಾದ ಅಗತ್ಯವಿದೆ’ ಎಂದು ಅವರು ಹೇಳಿದರು. ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಗಿರೀಶ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಗಂಧಿ ಶೇಖರ್‌ ಉಪಸ್ಥಿತರಿದ್ದರು. ಕಾಪು ಉತ್ತರ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಅಬಿಬ್‌ ಅಲಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.