ರಾಮನಗರ: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿದ್ದೇನೆ. ಜೊತೆಗೆ ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ ಎಂದು ಬಿಡದಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬಿಡದಿಯ ಟೊಯೋಟಾ-ಕಿರ್ಲೋಸ್ಕರ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್ಸಿಎಲ್ಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ ಎಂದರು.
ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು. ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.










