ಬೆಂಗಳೂರು : ಮಂಗಳೂರು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಹೊರಟಿದೆ. ಇದನ್ನು ತೋರಿಸುವುದಕ್ಕಾಗಿ ಈ ವೀಡಿಯೋ ಬಿಡುಗಡೆ ಮಾಡಿದ್ದೇನೆ. ಸರ್ಕಾರ ಯಾವುದೇ ತಪ್ಪು ಮಾಡದೆ ಇದ್ದು, ಪೊಲೀಸರು ಇಂತಹ ವರ್ತನೆ ತೋರಿಸದೇ ಇದ್ದಿದ್ದರೆ ಮಂಗಳೂರಿನಲ್ಲಿ ಹಿಂಸಾಚಾರ ನಡೆಯುತ್ತಿರಲಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಡೆದಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಹಿಂಸಾಚಾರ ಘಟನೆಗಳು ನಡೆದಿದ್ದು, ಇದಕ್ಕೆಲ್ಲಾ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷಾ ಅವರೇ ಕಾರಣ. ಸರ್ಕಾರ ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ನೇತೃತ್ವದಲ್ಲಿ ಜನತಾ ಅದಾಲತ್ ರಚನೆ ಆಗಿದೆ. ಆದರೆ, ಜನತಾ ಅದಾಲತ್ ಮಾಡಬಾರದು, ಪ್ರೆಸ್ ಮೀಟ್ ಮಾಡಬಾರದು ಎಂದು ಪೊಲೀಸರು ಮೊಟಕುಗೊಳಿಸಿದ್ದಾರೆ. ಇದಕ್ಕೆ ಅಧಿಕಾರ ಕೊಟ್ಟವರು ಯಾರು? ಬೀದಿ ಬದಿ ವ್ಯಾಪಾರಿಗಳಿಗೂ ಪೊಲೀಸರು ಹೊಡೆಯುತ್ತಾರೆ. ಸಿಕ್ಕಸಿಕ್ಕವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಪ್ರಕರಣದ ಕುರಿತು ಉಡುಪಿ ಜಿಲ್ಲಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಸರ್ಕಾರ ಹೇಳಿದ ಹಾಗೆ ಅವರು ವರದಿಯನ್ನು ನೀಡುತ್ತಾರೆ. ಆನತಾ ಅದಾಲತ್ನಲ್ಲಿ ಜನರೇ ಈ ವೀಡಿಯೋ ಮಾಹಿತಿಯನ್ನು ನೀಡಿದ್ದಾರೆ. ಪೊಲೀಸರೇ ಇಲ್ಲಿ ತಪ್ಪು ಮಾಡಿದ್ದಾರೆ. ಅಂಗಡಿ ಮುಂದೆ ನಿಂತಿದ್ದವರ ಮುಂದೆ ಲಾಠಿ ಚಾರ್ಜ್ ಮಾಡಿದ್ದಾರೆ. ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಸಂಗ್ರಹ ಮಾಡಿದ್ದೇನೆ. ವಿಧಾನಸಭೆಯಲ್ಲೂ ಈ ವಿಚಾರವಾಗಿ ಮಾತನಾಡುತ್ತೇನೆ. ಪೊಲೀಸರು ಮಾಡಿದ ತಪ್ಪನ್ನು ಚರ್ಚೆ ಮಾಡುತ್ತೇನೆ. ಸರ್ಕಾರ ತನ್ನ ತಪ್ಪನ್ನು ಮುಚ್ಚಿಡಲು ಪ್ರಕರಣವನ್ನು ತಿರುಚಲು ಮುಂದಾಗುತ್ತಿದೆ. ಆನತಾ ಅದಾಲತ್ ಮಾಡಲು ಹೋದಾಗ ಅಲ್ಲಿನೆಸ್ಐ ಅದಕ್ಕೆ ಅವಕಾಶ ನೀಡಿಲ್ಲ. ಪೊಲೀಸರಿಗೆ ಈ ಅಧಿಕಾರವನ್ನು ನೀಡಿದವರು ಯಾರು? ಎಂದು ಪ್ರಶ್ನಿಸಿದರು.










