ರಾಯಚೂರು: ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಎಂದಿನಂತೆ ನಿನ್ನೆ ಕೂಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ.
ಬಸನಗೌಡ ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿ. ಯಾವುದೇ ಬಿಪಿ, ಶುಗರ್ ಹಾಗೂ ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದ ಬಸನಗೌಡ ಏಕಾಏಕಿ ಸಾವನ್ನಪ್ಪಿದ್ದಾರೆ. ಇನ್ನು ಸಿಬ್ಬಂದಿ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.










