ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ. ಈ ಪ್ರಕರಣದ ವಿಚಾರಣೆ ಇಂದು ಮಧ್ಯಾಹ್ನ ನಡೆಯಲಿದೆ.
ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ, ನೆಲೆಸುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ ದಾವಣಗೆರೆ ಕಡೆ ಹೊರಟಿದ್ದಾರೆ. ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.
ಮುರುಘಾ ಶ್ರೀ ಕಾರಾಗೃಹದಿಂದ ಬಿಡುಗಡೆಯಾದ ಹಿನ್ನೆಲೆ, ಮಠದ ಭಕ್ತರು, ಅಭಿಮಾನಿಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೆ ಇದೇ ವೇಳೆ ಶ್ರೀಗಳ ಪರ ಘೋಷಣೆ ಕೂಗಿ, ಜೈಕಾರ ಹಾಕಿದರು.










