ಸಪ್ತಪದಿ ಯೋಜನೆ ಮರುಚಾಲನೆಗೆ ಆದೇಶಿಸಿದ ಶಶಿಕಲಾ ಜೊಲ್ಲೆ.

70
firstsuddi

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ” ಯೋಜನೆಯನ್ನು ಪ್ರಾರಂಭಿಸಿತ್ತು.

ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಸಚಿವರು ಆದೇಶಿಸಿದ್ದಾರೆ.

ಏಪ್ರಿಲ್ 28, 2022 ಮತ್ತು ಮೇ 11 ಮತ್ತು 25, 2022ರಂದು ಆಯ್ದ ಏ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ–ಸಪ್ತಪದಿ ನಡೆಸಲು ಆದೇಶಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.